ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಮತ್ತಷ್ಟು ಸಹಕಾರ ನೀಡುವ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ಗಳನ್ನು ಆರಂಭಿಸುತ್ತಿದೆ. ನವೆಂಬರ್ 28 ರಂದು ಬ್ಯಾಂಕ್ಗೆ ಚಾಲನೆ ನೀಡಲಾಗುತ್ತಿದೆ. ಇನ್ನು ಸಾಲ ಸೌಲಭ್ಯ ಪಡೆಯಲು ಮಹಿಳೆಯರು ಹಣ ಕಟ್ಟಿ ಷೇರ್ ಹೋಲ್ಡರ್ಸ್ ಆಗಮಿಸಬೇಕಿದೆ.
ಈ ಬಗ್ಗೆ ತುಮಕೂರಿನಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾಹಿತಿ ನೀಡಿದ್ದಾರೆ. ಕರ್ನಾಟಕದಲ್ಲಿ ಮಹಿಳೆಯರ ಸಬಲೀಕರಣಕ್ಕಾಗಿ ಎಸ್.ಎಂ.ಕೃಷ್ಣ ಅವರ ಕಾಲದಲ್ಲಿ ಮೋಟಮ್ಮ ಅವರು ಸಚಿವರಾಗಿದ್ದಾಗ ಸ್ತ್ರೀ ಶಕ್ತಿ ಸಂಘಗಳನ್ನು ಸ್ಥಾಪಿಸಿ, ಮಹಿಳೆಯರಿಗೆ ಅನುಕೂಲ ಮಾಡಿಕೊಡಲಾಗಿತ್ತು. ಇದೀಗ ನನ್ನ ಹೃದಯಕ್ಕೆ ಹತ್ತಿರವಾಗಿರುವ ಗೃಹಲಕ್ಷ್ಮಿ ಬ್ಯಾಂಕ್ ತರಲಾಗುತ್ತಿದೆ ಎಂದರು.
ಈ ಹಿಂದೆ ಗಂಡನ ಉದ್ಯಮದಲ್ಲಿ ಹೆಂಡತಿ ಕೈಜೋಡಿಸುತ್ತಿದ್ದಳು. ಆದರೆ, ಇತ್ತೀಚೆಗೆ ಮಹಿಳೆಯರೆ ಉದ್ಯಮಿಗಳಾಗುತ್ತಿದ್ದಾರೆ. ಇಂತಹ ಮಹಿಳೆಯರಿಗೆ ಸಹಾಯ ಮಾಡುವ ಉದ್ದೇಶದಿಂದಲೇ ಗೃಹಲಕ್ಷ್ಮಿ ಸಹಕಾರಿ ಬ್ಯಾಂಕ್ ಆರಂಭಿಸುತ್ತಿದೆ. ಧರ್ಮಸ್ಥಳ ಸ್ವ ಸಹಾಯ ಸಂಘ ಕಳೆದ 20 ವರ್ಷಗಳಿಂದ ಹೊಸ ಕ್ರಾಂತಿಯನ್ನೇ ಸೃಷ್ಟಿಸಿದೆ. ಅವರ ಸೇವೆ ಸದಾ ಸ್ಮರಣೀಯ. ಆದರೆ ಕೆಲವೊಂದು ಖಾಸಗಿ ಫೈನಾನ್ಸ್ ಕಂಪನಿಗಳಿಂದ ಜನರಿಗೆ ತೊಂದರೆಯಾಗುತ್ತಿದೆ. ಇದನ್ನು ತಡೆಗಟ್ಟಲು ಗೃಹಲಕ್ಷ್ಮಿ ಸಂಘ ಸಹಾಯವಾಗಲಿದೆ. ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
- ಗೃಹಲಕ್ಷ್ಮಿ ಬ್ಯಾಂಕ್ಗೆ ಸೇರ ಬಯಸುವವರು ಸಾವಿರ ರೂಪಾಯಿ ಕೊಟ್ಟು ಷೇರ್ ಹೋಲ್ಡರ್ ಆಗಬೇಕು.
- ಸಂಪೂರ್ಣ ಕ್ಯಾಶ್ ಲೆಸ್ ವ್ಯವಹಾರ ನಡೆಯಲಿದೆ.
- ಷೇರುದಾರರಾದ ಬಳಿಕ ಪ್ರತಿ ತಿಂಗಳು ಇನ್ನೂರು ರೂಪಾಯಿ ಕಟ್ಟಬೇಕು.
- ಷೇರುದಾರರಾದ ಆರು ತಿಂಗಳಲ್ಲಿ ಲೋನ್ ಪಡೆಯಬಹುದು.
- ಮೂವತ್ತು ಸಾವಿರದಿಂದ ಮೂರು ಲಕ್ಷದವರೆಗೂ ಸಾಲ ಸೌಲಭ್ಯ ಸಿಗಲಿದೆ.
- ಗೃಹಲಕ್ಷ್ಮಿ ಬ್ಯಾಂಕ್ ನಲ್ಲಿ ವೈಯಕ್ತಿಕ ಸಾಲ ಮಾತ್ರ ನೀಡಲಾಗುವುದು.
- ಗುಂಪು, ಸಂಘಗಳಿಗೆ ಸಾಲ ನೀಡಲಾಗುವುದಿಲ್ಲ.
- ರಾಷ್ಟ್ರೀಕೃತ ಬ್ಯಾಂಕುಗಳ ಬಡ್ಡಿದರದಲ್ಲಿ ಸಾಲ ನೀಡಲಾಗುತ್ತದೆ.
- ಸಂಘಕ್ಕೆ ಸೇರಲು ಯಾವುದೇ ಒತ್ತಡ ಇಲ್ಲ.
ಮುಂದೆ ಯಾವುದೇ ಸರ್ಕಾರಗಳು ಬಂದರೂ ಗೃಹಲಕ್ಷ್ಮಿ ಬ್ಯಾಂಕ್ ಅನ್ನು ಮುಚ್ಚುವ ಪ್ರಯತ್ನ ಮಾಡುವುದಿಲ್ಲ. ಇದು ನಿರಂತರ ಪ್ರಕ್ರಿಯೆ. ಮಹಿಳೆಯರಿಗೆ ಅನುಕೂಲ ಆಗುವ ದೃಷ್ಟಿಯಿಂದ ಬ್ಯಾಂಕ್ ತೆರೆಯಲಾಗುತ್ತಿದ್ದು, ಕೃಷಿ, ಹೈನುಗಾರಿಕೆ, ವಾಹನ, ಮಕ್ಕಳ ವಿದ್ಯಾಭ್ಯಾಸ ಸೇರಿದಂತೆ ವಿವಿಧ ರೀತಿಯಲ್ಲಿ ಲೋನ್ ತೆಗೆದುಕೊಳ್ಳಬಹುದು ಸಚಿವೆ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಗೃಹಲಕ್ಷ್ಮಿ ಯೋಜನೆ ಬಂದ ಮೇಲೆ ನಮ್ಮ ಇಲಾಖೆ ಮುಂಚೂಣಿಯಲ್ಲಿದೆ. ಮಹಿಳೆಯರ ಸಬಲೀಕರಣವೇ ನಮ್ಮ ಸರ್ಕಾರದ ಗುರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು ಬೆಂಗಳೂರಿನಲ್ಲಿ ನವೆಂಬರ್ 28 ರಂದು ನಡೆಯಲಿರುವ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಗೆ ಚಾಲನೆ ಕುರಿತು ಬಾಲ ಭವನದಲ್ಲಿ ನಡೆದ ಜಿಲ್ಲಾಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು. ಬಹುನಿರೀಕ್ಷಿತ ಕಾರ್ಯಕ್ರಮದ ಯಶಸ್ಸಿಗೆ ಎಲ್ಲರೂ ಸಹಕರಿಸಬೇಕು. ತುಮಕೂರು ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನವನ್ನು ಹೆಚ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಒಂದು ಸಾವಿರ ಗೌರವ ಧನ ಹೆಚ್ಚಿಸಲಾಗುವುದು. ಈಗಾಗಲೇ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಚುನಾವಣಾ ಕೆಲಸದಿಂದ ವಿಮುಕ್ತಿಗೊಳಿಸಲಾಗಿದೆ. ಜಾತಿ ಸಮೀಕ್ಷೆಗೆ ಅಂಗನವಾಡಿ ಕಾರ್ಯಕರ್ತೆಯರು ಸಹಾಯ ಮಾಡಿದರು. ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.





















