ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಮಾ.5ರಂದು ಪುತ್ತೂರಿಗೆ ಭೇಟಿ ನೀಡಿದ್ದು, ಈ ವೇಳೆ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿದರು.
ಮಾರ್ಚ್ 5 ರಿಂದ ಮೂರು ದಿನಗಳ ಕಾಲ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುವ ಅವರು ಪುತ್ತೂರಿನ ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ತಾರಿಗುಡ್ಡೆಯ ಸಂತ್ರಸ್ತೆ ಮನೆಗೆ ಭೇಟಿ ನೀಡಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅಧ್ಯಕ್ಷರು ಸಂತ್ರಸ್ತೆಯ ಪರವಾಗಿ ತಾಯಿಯಂತೆ ಅವಳ ಜೊತೆ ನಿಲ್ಲುತ್ತೇನೆ. ಮಹಿಳಾ ಆಯೋಗ ನೊಂದ ಮಹಿಳೆಯರಿಗೆ ತಾಯಿ ಸ್ಥಾನದಲ್ಲಿದ್ದು ಸಹಾಯ ಮಾಡುತ್ತದೆ. ಸಂತ್ರಸ್ತೆ ಯುವತಿಗೆ ಎಲ್ಲಾ ರೀತಿಯ ಸಹಾಯವನ್ನು ಆಯೋಗದ ಮುಖಾಂತರ ಮಾಡಲಾಗುವುದು. ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಯನ್ನು ಮಾಡಿ ಆಕೆಯನ್ನು ಆರ್ಥಿಕ,ಶೈಕ್ಷಣಿಕವಾಗಿ ಸದೃಢಗೊಳಿಸುವ ಪ್ರಯತ್ನವನ್ನೂ ಮಾಡುತ್ತೇನೆ. ಪ್ರಕರಣ ನ್ಯಾಯಾಲಯದ ಮುಂದೆ ಇರುವಾಗ ಇದಕ್ಕಿಂತ ಹೆಚ್ಚು ಮಾತನಾಡಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಪುತ್ತೂರು ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಅವ್ಯವಸ್ಥೆಯನ್ನು ನೋಡುವಂತೆ ಮಾಧ್ಯಮ ಪ್ರತಿನಿಧಿಗಳು ಆಯೋಗ್ ಅಧ್ಯಕ್ಷೆಯನ್ನು ವಿನಂತಿಸಿದ ಸಂದರ್ಭದಲ್ಲಿ ಕಾಲೇಜಿನ ಸ್ಥಿತಿಗತಿಯನ್ನು ಪರಾಮರ್ಶಿಸಲು ಹೊರಟಿದ್ದ ಆಯೋಗದ ಅಧ್ಯಕ್ಷೆಯನ್ನು ಸ್ಥಳದಲ್ಲಿ ಮಹಿಳಾ ಕಾಂಗ್ರೇಸ್ಸಿನ ಮುಖಂಡರು ತಡೆದ ಹಿನ್ನಲೆಯಲ್ಲಿ ಕಾಲೇಜಿಗೆ ಭೇಟಿ ನೀಡುವ ಕಾರ್ಯಕ್ರಮವನ್ನು ರದ್ದುಗೊಳಿಸಿ,ಮಂಗಳೂರಿಗೆ ತೆರಳಿದ್ದಾರೆ.
ಮಂಗಳೂರಿನ ಸ್ಟೇಟ್ ಬ್ಯಾಂಕ್ ಬಳಿ ಇರುವ ಹಸಿ ಮೀನು ಮಾರುಕಟ್ಟೆಗೆ ಭೇಟಿ ನೀಡಿದ ಅವರು ಅಲ್ಲಿ ವ್ಯಾಪಾರ ನಡೆಸುತ್ತಿರುವ ಮಹಿಳೆಯರ ಸಮಸ್ಯೆಯನ್ನು ಆಲಿಸಿದರು. ನೂತನವಾಗಿ ನಿರ್ಮಾಣಗೊಂಡಿರುವ ಮೀನು ಮಾರುಕಟ್ಟೆಯಲ್ಲಿ ಗಾಳಿ ಹಾಗೂ ಬೆಳಕಿನ ಸೂಕ್ತ ವ್ಯವಸ್ಥೆಯ ಕೊರತೆ ಇದ್ದು, ಬಾಡಿಗೆ ದರ ಕೂಡ ಹೆಚ್ಚಾಗಿದೆ ಎಂದು ಅವರು ದೂರಿದರು. ಈ ಕಾರಣದಿಂದ ತಮ್ಮ ವ್ಯಾಪಾರವನ್ನು ಹೊಸ ಮಾರುಕಟ್ಟೆಗೆ ಸ್ಥಳಾಂತರಿಸಲು ನಿರಾಕರಿಸುತ್ತಿರುವುದಾಗಿ ತಿಳಿಸಿದ್ದಾರೆ.
ಈ ಸಮಸ್ಯೆಯನ್ನು ಜಿಲ್ಲಾಧಿಕಾರಿ ಹಾಗೂ ಸರಕಾರದ ಗಮನಕ್ಕೆ ತರುವುದಾಗಿ ಡಾ. ನಾಗಲಕ್ಷ್ಮಿ ಚೌಧರಿ ಹೇಳಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮತ್ತು ಇತರ ಅಧಿಕಾರಿಗಳೊಂದಿಗೆ ನಡೆಯುವ ಸಭೆಯಲ್ಲಿ ಈ ವಿಷಯವನ್ನು ಪ್ರಸ್ತಾಪಿಸುವುದಾಗಿ ಅವರು ಹೇಳಿದರು. ಮೀನುಗಾರ ಮಹಿಳೆಯರು ಲಿಖಿತವಾಗಿ ನೀಡುವ ಬೇಡಿಕೆಗಳನ್ನು ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಲು ಸರಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು


























