ಉಪ್ಪಿನಂಗಡಿ: ಬೈಕ್-ಲಾರಿ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಬಜತ್ತೂರು ಗ್ರಾಮದ ನೀರಕಟ್ಟೆಯಲ್ಲಿ ಏ.29ರಂದು ನಡೆದಿದೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ನೀರಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಕೂಟಿಯಲ್ಲಿದ್ದ ವಿದ್ಯಾರ್ಥಿನಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಂಡು ಸಂಭ್ರಮದಿಂದ ಮನೆಗೆ ಮರಳುತ್ತಿದ್ದ ಕಾಲೇಜು ವಿದ್ಯಾರ್ಥಿಗಳ ಬೈಕ್ ಗೆ ಯಮ ರೂಪಕವಾಗಿ ಬಂದ ಲಾರಿ ಡಿಕ್ಕಿಯಾಗಿ ಭೀಕರ ದುರಂತವೊಂದು ಸಂಭವಿಸಿದೆ. ಬಜತ್ತೂರು ಗ್ರಾಮದ ನೀರಕಟ್ಟೆ ಬಳಿ ಬುಧವಾರ ನಡೆದ ಈ ರಸ್ತೆ ಅಪಘಾತದಲ್ಲಿ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕಾರ್ತಿಕ್ (24) ಸ್ಥಳದಲ್ಲೇ ಮೃತಪಟ್ಟರೆ, ಅವರ ಜೊತೆಗಿದ್ದ ವಿದ್ಯಾರ್ಥಿನಿ ನೇಹಾ ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಉಪ್ಪಿನಂಗಡಿ ಸರಕಾರಿ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ತಮ್ಮ ಪರಿಚಿತರ ಮದುವೆ ಕಾರ್ಯಕ್ರಮಕ್ಕಾಗಿ ತೆರಳಿತ್ತು. ಮದುವೆ ಮುಗಿಸಿ ಗೆಳೆಯರೊಂದಿಗೆ ದ್ವಿಚಕ್ರ ವಾಹನಗಳಲ್ಲಿ ಮರಳುತ್ತಿದ್ದ ಸಂದರ್ಭದಲ್ಲಿ ನೀರಕಟ್ಟೆ ಬಳಿ ವೇಗವಾಗಿ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಕಾರ್ತಿಕ್ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಕಾರ್ತಿಕ್ ಉಪ್ಪಿನಂಗಡಿಯ ಶಿವಕುಮಾರ್ ಗಾಂಧೀಪಾರ್ಕ್ ಅವರ ಏಕೈಕ ಪುತ್ರನಾಗಿದ್ದು, ಅಂತಿಮ ಬಿಬಿಎ ವಿದ್ಯಾರ್ಥಿಯಾಗಿದ್ದರು. ಓದಿನ ಜೊತೆ ಜೊತೆಗೆ ಸಣ್ಣಪುಟ್ಟ ಕೆಲಸಗಳನ್ನು ಮಾಡಿಕೊಂಡು ಸ್ವಾವಲಂಬಿಯಾಗಿ ಬದುಕುತ್ತಿದ್ದ ಕಾರ್ತಿಕ್, ಎಲ್ಲರ ಮೆಚ್ಚಿನ ಯುವಕನಾಗಿದ್ದರು. ಅಪಘಾತದಲ್ಲಿ ತಲೆ ಮತ್ತು ಕಾಲಿಗೆ ಬಲವಾದ ಪೆಟ್ಟು ಬಿದ್ದಿರುವ ಅಂತಿಮ ಬಿಎ ವಿದ್ಯಾರ್ಥಿನಿ ನೇಹಾ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಮದುವೆ ಕಾರ್ಯಕ್ರಮಕ್ಕೆ ಹೋಗಿದ್ದ ವಿದ್ಯಾರ್ಥಿಗಳಲ್ಲಿ ಒರ್ವ ಮಸಣ ಸೇರಿದರೆ, ಇನ್ನೊಬ್ಬರು ಆಸ್ಪತ್ರೆ ಪಾಲಾಗಿರುವುದು ಸಹಪಾಠಿಗಳನ್ನು ಹಾಗೂ ಸ್ಥಳೀಯರನ್ನು ಶೋಕದ ಮಡುವಿನಲ್ಲಿ ತಪ್ಪಿದೆ. ಈ ಬಗ್ಗೆ ಪುತ್ತೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


























