ಪುತ್ತೂರು: ಕಬಕ–ಪುತ್ತೂರು ರೈಲು ನಿಲ್ದಾಣದ ಸಮಗ್ರ ಅಭಿವೃದ್ಧಿಗೆ ಮಹತ್ವದ ಹೆಜ್ಜೆ ಇಡಲಾಗಿದೆ. ಮಂಗಳೂರಿನಿಂದ ಬೆಂಗಳೂರಿನವರೆಗೆ ರೈಲು ಹಳಿ ವಿದ್ಯುದೀಕರಣ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ, ಮುಂದಿನ ದಿನಗಳಲ್ಲಿ ರೈಲು ಸಂಚಾರ ಮತ್ತಷ್ಟು ಹೆಚ್ಚಾಗುವ ನಿರೀಕ್ಷೆ ಇದೆ.
ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ನೈಋತ್ಯ ರೈಲ್ವೆಯ ಮೈಸೂರು ವಿಭಾಗದ ವತಿಯಿಂದ ಪ್ಲಾಟ್ಫಾರ್ಮ್–1ರಲ್ಲಿ ಶೆಲ್ಟರ್ ನಿರ್ಮಾಣ ಕಾಮಗಾರಿಗೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಶಿಲಾನ್ಯಾಸ ನೆರವೇರಿಸಿದರು.
ಈ ವೇಳೆ ಮಾತನಾಡಿದ ಅವರು, ಪುತ್ತೂರಿನ ಜನರ ಬಹುಕಾಲದ ಬೇಡಿಕೆಯಾದ ಪ್ಲಾಟ್ಫಾರ್ಮ್ ಮೇಲ್ಛಾವಣಿ ವಿಸ್ತರಣೆ ಹಾಗೂ ಎಪಿಎಂಸಿ ಭಾಗದಿಂದ ಬರುವ ರಸ್ತೆ ಅಭಿವೃದ್ಧಿಗೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ಮೆಮು ರೈಲು ಸೇವೆಗೆ ಪ್ರಯತ್ನ ಮುಂದುವರಿದಿದ್ದು, ಕೇಂದ್ರ ಸರ್ಕಾರದ ರೈಲ್ವೆ ಯೋಜನೆಗಳನ್ನು ರಾಜ್ಯ ಸರ್ಕಾರ ಸಮನ್ವಯದಿಂದ ಜಾರಿಗೊಳಿಸಿದರೆ ಇನ್ನಷ್ಟು ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು.
ಪುತ್ತೂರು ಗೇಟ್, ಕ್ಲಬ್ ಪ್ರದೇಶ ಸೇರಿದಂತೆ ವಿವಿಧ ಕಡೆಗಳಲ್ಲಿ 18 ಕೋಟಿ ವೆಚ್ಚದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣವಾಗಲಿದ್ದು, ವಂದೇ ಭಾರತ್ ರೈಲಿಗೆ ಅಗತ್ಯವಾದ ಕೋಚ್ ವಾಶಿಂಗ್ ವ್ಯವಸ್ಥೆಯನ್ನು 5 ಕೋಟಿ ವೆಚ್ಚದಲ್ಲಿ ಸುಬ್ರಹ್ಮಣ್ಯ ರೋಡ್ ರೈಲು ನಿಲ್ದಾಣದಲ್ಲಿ ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅಲ್ಲದೆ, ಕಬಕ–ಪುತ್ತೂರು ರೈಲು ನಿಲ್ದಾಣದಲ್ಲಿ ಎರಡನೇ ಪ್ಲಾಟ್ಫಾರ್ಮ್ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಯೋಜನೆ ರೂಪಿಸಲಾಗುವುದು ಎಂದು ಸಂಸದ ಬ್ರಿಜೇಶ್ ಚೌಟ ಭರವಸೆ ನೀಡಿದರು.
























