ಬೆಳ್ತಂಗಡಿ: ಕಣಿಯೂರು ಗ್ರಾಮದ ಪದ್ಮುಂಜ, ಅಡೆಂಜ ಎಂಬಲ್ಲಿ ಖೋಟಾ ನೋಟು ತಯಾರಿಸುತ್ತಿದ್ದ ಅಡ್ಡೆಯ ಮೇಲೆ ಉಪ್ಪಿನಂಗಡಿ ಪೊಲೀಸರು ದಾಳಿ ನಡೆಸಿ 5 ಜನರನ್ನು ಬಂಧಿಸಿದ್ದಾರೆ.
ಬಂಧಿತರಲ್ಲಿ ಕೇರಳ, ಮಂಗಳೂರು, ಬೆಳ್ತಂಗಡಿ ಮತ್ತು ಪುತ್ತೂರಿನ ನಿವಾಸಿಗಳು ಸೇರಿದ್ದಾರೆ. ಮನೆಯ ಹಿಂಭಾಗದಲ್ಲಿ 500 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಸುಟ್ಟುಹಾಕಿದ್ದ ಕುರುಹುಗಳನ್ನು ಪತ್ತೆ ಮಾಡಿದ್ದಾರೆ. ಯಂತ್ರಗಳನ್ನು ಬಳಸಿ ನಕಲಿ ನೋಟುಗಳನ್ನು ಮುದ್ರಿಸಿ ಚಲಾವಣೆ ಮಾಡುವ ಉದ್ದೇಶ ಹೊಂದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಡಿವೈಎಸ್ಪಿ ರೋಹಿಣಿ.ಸಿ.ಕೆ ಮತ್ತು ಉಪ್ಪಿನಂಗಡಿ ಸರ್ಕಲ್ ಇನ್ಸೆಕ್ಟರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ದೊಡ್ಡ ಜಾಲವಿರುವ ಶಂಕೆ ಇದ್ದು, ತನಿಖೆ ಮುಂದುವರಿದಿದೆ. ಈ ಬಗ್ಗೆ ಪೊಲೀಸ್ ಇಲಾಖೆಯಿಂದ ಅಧಿಕೃತ ಪತ್ರಿಕಾಗೋಷ್ಠಿ ನಡೆಸಿ ಹೆಚ್ಚಿನ ವಿವರ ನೀಡಲಾಗುವುದು.
























