ನವದೆಹಲಿ: ಕಾಕ್ರೋಚ್ ಜನತಾ ಪಾರ್ಟಿ ಹೋರಾಟದಿಂದ ಕೊನೆಗೂ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ದೇಶದಲ್ಲಿನ ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ಮುಂದಾಗಿದೆ.
ಈ ಸಂಬಂಧ ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪ್ರಧಾನಿ ಮೋದಿ ವಿಡಿಯೋ ಸಂದೇಶ ಹಂಚಿಕೊಂಡಿದ್ದು, ದೇಶದಲ್ಲಿನ ಪರೀಕ್ಷಾ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ಆಧುನೀಕರಿಸುವತ್ತ ಈ ಕಾರ್ಯಪಡೆ ಗಮನಹರಿಸಲಿದೆ ಎಂದು ಹೇಳಿದ್ದಾರೆ. ಪರೀಕ್ಷೆಗಳ ಪಾವಿತ್ರ್ಯತೆ ಹಾಗೂ ವ್ಯವಸ್ಥಿತ ಸುಧಾರಣೆಗಳ ಅಗತ್ಯತೆಯ ಕುರಿತು ಹೆಚ್ಚುತ್ತಿರುವ ಕಳವಳಗಳ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ.
ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಭಾರತ ಸರ್ಕಾರ ನಿರಂತರವಾಗಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡಿದವರು ಜೈಲುಗಳಲ್ಲಿ ಕೊಳೆಯುತ್ತಿದ್ದಾರೆ. ನಾವು ತ್ವರಿತ ನ್ಯಾಯಾಲಯಗಳನ್ನು ಸ್ಥಾಪಿಸಿದ್ದೇವೆ. ನಾಳೆ ಸಂಸತ್ತಿನಲ್ಲಿಯೂ ಸಹ, ಕಠಿಣ ಕಾನೂನು ನಿಬಂಧನೆಗಳೊಂದಿಗೆ ಹೊಸ ಕಾನೂನನ್ನು ರೂಪಿಸುವ ದಿಕ್ಕಿನಲ್ಲಿ ನಾವು ಮುಂದುವರಿಯುತ್ತಿದ್ದೇವೆ ಮೋದಿ ತಿಳಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧದ ಪ್ರತಿಭಟನೆ ಕೊನೆಗೊಳಿಸಿದೆ. ಅದಾದ ಒಂದು ದಿನದ ನಂತರ ಈ ಪ್ರಕಟಣೆ ಬಂದಿದೆ.
























