ಬೆಂಗಳೂರು: ರಾಜ್ಯದಲ್ಲಿ ನಿಕೋಟಿನ್ಯುಕ್ತ ಗುಟ್ಕಾ ಹಾಗೂ ಪಾನ್ ಮಸಾಲ ಮಾರಾಟ ನಿಷೇಧಿಸಿ ಆರೋಗ್ಯ ಇಲಾಖೆ ಹೊರಡಿಸಿದ್ದ ಆದೇಶ ಇದೀಗ ಹಿಂಪಡೆಯುವ ಹಂತಕ್ಕೆ ಬಂದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನಿಷೇಧ ಆದೇಶವನ್ನು ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಆರೋಗ್ಯ ಇಲಾಖೆಯ ನಿರ್ಧಾರಕ್ಕೆ ಕಾಂಗ್ರೆಸ್ನ ಕೆಲ ಶಾಸಕರು ಹಾಗೂ ರೈತ ವಲಯದಿಂದ ವಿರೋಧ ವ್ಯಕ್ತವಾಗಿತ್ತು. ನಿಷೇಧದಿಂದ ಕೆಲವು ಜಿಲ್ಲೆಗಳ ರೈತರು ಹಾಗೂ ಸಂಬಂಧಿತ ವಲಯದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಶಾಸಕರ ನಿಯೋಗ ಮುಖ್ಯಮಂತ್ರಿಗಳ ಗಮನಕ್ಕೆ ತಂದಿತ್ತು. ಕರ್ನಾಟಕದಲ್ಲಿ ಗುಟ್ಕಾ ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ವಾಪಸ್ ಪಡೆಯುವಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗುಟ್ಕಾ ನಿಷೇಧ ಆದೇಶದ ಕುರಿತು ಬಹುತೇಕ ಶಾಸಕರಿಂದ, ಅದರಲ್ಲಿಯೂ ಕಾಂಗ್ರೆಸ್ ಶಾಸಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಚರ್ಚಿಸಲು ಹಿರಿಯ ಶಾಸಕರು ನಿನ್ನೆ ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಆದೇಶದ ಬಗ್ಗೆ ತಮಗೆ ಮಾಹಿತಿ ಇರಲಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದ್ದರು. ಬಳಿಕ ನಡೆದ ಸಂಪುಟ ಸಭೆಯಲ್ಲೂ ಈ ವಿಚಾರ ಪ್ರಸ್ತಾಪವಾಗಿದೆ.
ಆರೋಗ್ಯ ಇಲಾಖೆ ಕಾರ್ಯದರ್ಶಿಯನ್ನು ತರಾಟೆಗೆ ತೆಗೆದುಕೊಂಡ ಸಿಎಂ ಡಿ.ಕೆ. ಶಿವಕುಮಾರ್, ತಮ್ಮ ಗಮನಕ್ಕೆ ತರದೇ ಇಂತಹ ಗಂಭೀರ ಆದೇಶವನ್ನು ಹೇಗೆ ಹೊರಡಿಸಲಾಗಿದೆ ಎಂದು ಪ್ರಶ್ನಿಸಿದ್ದಾರೆ. ಸುಮಾರು ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಈ ನಿರ್ಧಾರ ಪರಿಣಾಮ ಬೀರುತ್ತದೆ ಎಂದು ಸಿಎಂ ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಡಿ.ಕೆ. ಶಿವಕುಮಾರ್, ನಿಷೇಧದಂತಹ ಪ್ರಮುಖ ನಿರ್ಧಾರ ಕೈಗೊಳ್ಳುವ ಮುನ್ನ ತಮ್ಮ ಗಮನಕ್ಕೆ ತರುವುದು ಅಗತ್ಯ ಎಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಸಚಿವ ಸಂಪುಟ ಸಭೆಯಲ್ಲೂ ಈ ವಿಚಾರ ಚರ್ಚೆಯಾಗಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಸ್ಪಷ್ಟನೆ ಕೇಳಲಾಗಿದೆ. ರೈತರ ಹಿತದೃಷ್ಟಿಯಿಂದ ನಿಷೇಧ ಆದೇಶವನ್ನು ಹಿಂಪಡೆಯಲು ಸೂಚನೆ ನೀಡಲಾಗಿದ್ದು, ಈ ಸಂಬಂಧ ಶೀಘ್ರದಲ್ಲೇ ಹೊಸ ಮಾರ್ಗಸೂಚಿ ಹೊರಬೀಳುವ ನಿರೀಕ್ಷೆಯಿದೆ.
























