ಪುತ್ತೂರು: ಕೆಆರ್ಐಡಿಎಲ್ ಅಧಿಕಾರಿಗಳ ವಿರುದ್ಧ 7% ಕಮಿಷನ್ ಆರೋಪ: ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ (ಕೆಆರ್ಐಡಿಎಲ್) ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಕಿರಿಯ ಎಂಜಿನಿಯರ್ ವಿರುದ್ಧ ಶೇ 7 ಹೆಚ್ಚುವರಿ ಕಮಿಷನ್ ವಸೂಲಿ ಮತ್ತು ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ ಕೇಳಿಬಂದಿದೆ. ಈ ಸಂಬಂಧ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಸಮಗ್ರ ತನಿಖೆಗೆ ಆಗ್ರಹಿಸಿದ್ದಾರೆ.
ಸಚಿವರ ಹೆಸರು ದುರ್ಬಳಕೆ?
ಕೆಆರ್ಐಡಿಎಲ್ ಮಂಗಳೂರು ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ವಿಜಯ್ ಮತ್ತು ಕಿರಿಯ ಎಂಜಿನಿಯರ್ ಪ್ರಜ್ವಲ್ ವಿರುದ್ಧ ಗುತ್ತಿಗೆದಾರರಿಂದ ವ್ಯಾಪಕ ದೂರುಗಳು ಬಂದಿವೆ. ವಿವಿಧ ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದ ವೇಳೆ ಜಿಲ್ಲಾ ಉಸ್ತುವಾರಿ ಸಚಿವರು, ಇಲಾಖಾ ಸಚಿವರು ಹಾಗೂ ನಿಗಮದ ಮುಖ್ಯಸ್ಥರಿಗೆ ಮಾಸಿಕ ಹಣ ಸಂದಾಯ ಮಾಡಬೇಕೆಂದು ಹೇಳಿ, ಶೇ 7ರಷ್ಟು ಹೆಚ್ಚುವರಿ ಹಣ ವಸೂಲಿ ಮಾಡಲಾಗುತ್ತಿದೆ. ಇದನ್ನು ಪ್ರಶ್ನಿಸಿದ ಗುತ್ತಿಗೆದಾರರಿಗೆ ಅಧಿಕಾರಿಗಳು ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಶಾಸಕರು ಪತ್ರದಲ್ಲಿ ವಿವರಿಸಿದ್ದಾರೆ.
ಅಮಾನತಿಗೆ ಆಗ್ರಹ:
ಆದ್ದರಿಂದ, ಆರೋಪಿತ ಅಧಿಕಾರಿಗಳ ವಿರುದ್ಧ ಈಗಾಗಲೇ ಬಂದಿರುವ ದೂರುಗಳು ಮತ್ತು ಆರೋಪಗಳ ಕುರಿತು ನಿಷ್ಪಕ್ಷಪಾತ ಹಾಗೂ ಸಮಗ್ರ ಇಲಾಖಾ ತನಿಖೆ ನಡೆಸುವಂತೆ ಮನವಿ ಮಾಡುತ್ತಿದ್ದೇನೆ. ಅಲ್ಲದೆ, ತನಿಖೆ ಪೂರ್ಣಗೊಳ್ಳುವವರೆಗೆ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ, ಅಗತ್ಯವಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತುಗೊಳಿಸುವುದು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ಬೇರೆಡೆಗೆ ವರ್ಗಾವಣೆ ಮಾಡುವ ಕುರಿತು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ.
‘ಸಾರ್ವಜನಿಕ ಹಣದಿಂದ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಯ್ದುಕೊಳ್ಳುವುದು ಅಗತ್ಯ. ಅಧಿಕಾರಿಗಳ ಮೇಲಿನ ಈ ಆರೋಪಗಳು ಇಲಾಖೆಯ ಘನತೆ ಹಾಗೂ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆ ತಂದಿವೆ. ಆದ್ದರಿಂದ ಈ ಇಬ್ಬರೂ ಅಧಿಕಾರಿಗಳ ವಿರುದ್ಧ ನಿಷ್ಪಕ್ಷಪಾತ ಇಲಾಖಾ ತನಿಖೆ ನಡೆಸಬೇಕು. ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಅಮಾನತುಗೊಳಿಸಬೇಕು ಅಥವಾ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಮಾಡಬೇಕು’ ಎಂದು ಶಾಸಕರು ಒತ್ತಾಯಿಸಿದ್ದಾರೆ.
ತನಿಖೆಯಲ್ಲಿ ಆರೋಪ ಸಾಬೀತಾದಲ್ಲಿ ಸೇವಾ ನಿಯಮಾವಳಿಗಳ ಅನ್ವಯ ಕಠಿಣ ಶಿಸ್ತುಕ್ರಮ ಜರುಗಿಸುವುದರ ಜೊತೆಗೆ, ಅಕ್ರಮವಾಗಿ ವಸೂಲಿ ಮಾಡಿರುವ ಮೊತ್ತವನ್ನು ಅವರಿಂದಲೇ ವಸೂಲಿ ಮಾಡಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕೆಂದು ಅವರು ಸಿಎಂಗೆ ಕೋರಿದ್ದಾರೆ.
ತನಿಖೆಯಲ್ಲಿ ಆರೋಪಗಳು ಸಾಬೀತಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಅನ್ವಯಿಸುವ ಸೇವಾ ನಿಯಮಗಳು ಹಾಗೂ ಇಲಾಖಾ ನಿಯಮಾವಳಿಗಳನ್ನಯ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕು. ಅಲ್ಲದೆ, ಸರ್ಕಾರದ ಹಣಕ್ಕೆ ನಷ್ಟ ಉಂಟಾಗಿರುವುದು ಅಥವಾ ಅಕ್ರಮವಾಗಿ ಹಣ ವಸೂಲಿ ಮಾಡಿರುವುದು ತನಿಖೆಯಿಂದ ದೃಢಪಟ್ಟಲ್ಲಿ, ಅಂತಹ ಮೊತ್ತವನ್ನು ವಸೂಲಿ ಮಾಡುವುದರ ಜೊತೆಗೆ ಕಾನೂನುಬದ್ದ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಆದ್ದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಹಾಗೂ ಕೈಗೊಂಡ ಕ್ರಮದ ವಿವರವನ್ನು ತಿಳಿಸುವಂತೆಯೂ ಪತ್ರದಲ್ಲಿ ಅಶೋಕ್ ಮನವಿ ಮಾಡಿಕೊಂಡಿದ್ದಾರೆ.
























