ಪುತ್ತೂರು: ಬಂಟ್ವಾಳದಲ್ಲಿ ಕಳೆದ ವರ್ಷ ಮೇ 27ರಂದು ನಡೆದಿದ್ದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 6ರಿಂದ 13ನೇ ಆರೋಪಿಗಳಾಗಿರುವ ಎಂಟು ಮಂದಿಗೆ ಮೈಸೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ಹಾಗೂ ವಿಶೇಷ ಕೋಕಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಭರತ್ ಕುಮ್ಮೇಲು, ಅಭಿನ್ ರೈ, ತೇಜಾಕ್ಷ, ಶಿವಪ್ರಸಾದ್ ತುಂಬೆ, ಪ್ರದೀಪ, ಶಾಹಿತ್, ಸಚಿನ್ ಹಾಗೂ ರಂಜಿತ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಗಳ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶೆ ಉಷಾರಾಣಿ ಅವರು ವಾದ-ಪ್ರತಿವಾದ ಆಲಿಸಿ ಜಾಮೀನು ಮಂಜೂರು ಮಾಡಿ ಆದೇಶಿಸಿದ್ದಾರೆ.
ಈ ಪ್ರಕರಣದಲ್ಲಿ ಬಂಟ್ವಾಳ ಗ್ರಾಮಾಂತರ ಪೊಲೀಸರು ಒಟ್ಟು 14 ಆರೋಪಿಗಳ ವಿರುದ್ಧ ಬಂಟ್ವಾಳ ಜೆಎಂಎಫ್ಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಬಳಿಕ ಪ್ರಕರಣದಲ್ಲಿ ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ (ಕೋಕಾ) ಅಡಿ ತನಿಖೆ ನಡೆಸಲು ಅನುಮತಿ ಕೋರಲಾಗಿತ್ತು.
ಮೈಸೂರಿನಲ್ಲಿ ಕೋಕಾ ವಿಶೇಷ ನ್ಯಾಯಾಲಯ ಇರುವ ಹಿನ್ನೆಲೆಯಲ್ಲಿ ಪ್ರಕರಣವನ್ನು ಮೈಸೂರಿಗೆ ವರ್ಗಾಯಿಸಲಾಗಿತ್ತು. ಈಗಾಗಲೇ ಪ್ರಕರಣದ 14ನೇ ಆರೋಪಿ ರವಿಸಂಜಯ್ಗೆ ಮಂಗಳೂರಿನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಇನ್ನು 15ರಿಂದ 23ನೇ ಆರೋಪಿಗಳ ವಿರುದ್ಧ ಪೊಲೀಸರು ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದು, ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿತ್ತು. ಎಂಟು ಆರೋಪಿಗಳ ಪರವಾಗಿ ವಕೀಲರಾದ ಮಹೇಶ್ ಕಜೆ, ಸಿ.ವಿ. ಕೇಶವಮೂರ್ತಿ, ಪ್ರಸಾದ್ ಕುಮಾರ್ ರೈ ಹಾಗೂ ಪಿ.ಜೆ. ರಾಘವೇಂದ್ರ ವಾದಿಸಿದ್ದರು.
























