ನೈರುತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರ ಚುನಾವಣೆ: ಪುತ್ತೂರಿನಲ್ಲಿ ಪ್ರಚಾರಕ್ಕೆ ಶಾಸಕರಾದ ಅಶೋಕ್ ಕುಮಾರ್ ರೈ ಯವರಿಂದ ಚಾಲನೆ,ಅಭ್ಯರ್ಥಿ ಅಯನೂರು ಮಂಜುನಾಥ್ ಉಪಸ್ಥಿತಿ
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಪ್ರಚಾರ ಕಾರ್ಯಕ್ಕೆ ಪುತ್ತೂರಿನಲ್ಲಿ ಶಾಸಕರಾದ ಅಶೋಕ್ ರೈ ಯವರು ಚಾಲನೆ ನೀಡಿದರು.
ಈ ಬಾರಿಯ ವಿಧಾನಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕ ಕ್ಷೇತ್ರ ಎರಡರಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯಶಾಲಿಯಾಗಬೇಕು ಇದಕ್ಕಾಗಿ ಕಾರ್ಯಕರ್ತರು ತಳಮಟ್ಟದಲ್ಲಿ ಕಾರ್ಯಪ್ರವೃತ್ತರಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು.
ಅವರು ಪುತ್ತೂರಿನ ಕಾಂಗ್ರೆಸ್ ಚುನಾವಣಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪದವೀಧರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಿರುವ ಆಯನೂರು ಮಂಜುನಾಥ್ ಅವರು ಓರ್ವ ಸಜ್ಜನ ಮತ್ತು ವಿದ್ಯಾವಂತ ರಾಜಕಾರಣಿಯಾಗಿದ್ದು ಈ ಹಿಂದೆಯೂ ಹಲವಾರು ಅಭಿವೃದ್ದಿ ಕೆಲಸಗಳನ್ನು ಮಾಡುವ ಮೂಲಕ ರಾಜ್ಯದಲ್ಲಿ ಚಿರಪರಿಚಿತ ನಾಯಕರಾಗಿದ್ದಾರೆ. ಜನರ ಸಮಸ್ಯೆಗಳನ್ನು ಹತ್ತಿರದಿಂದ ಬಲ್ಲವರಾಗಿರುವ ಇವರು ಎಂಥಾ ಸನ್ನಿವೇಶದಲ್ಲೂ ಸಮಸ್ಯೆಗಳನ್ನು ಎದುರಿಸುವ ಶಕ್ತಿ ಇದ್ದು ಬಡವರ ಬಗ್ಗೆ ಅಪಾರ ಕಾಳಜಿ ಇರುವ ನಾಯಕರಾಗಿದ್ದು ಇವರಿಗೆ ಪುತ್ತೂರಿನಲ್ಲಿ ಹೆಚ್ಚು ಮತ ಚಲಾವಣೆಯಾಗುವಂತೆ ನಾವು ಕಾರ್ಯಪೃವೃತ್ತರಾಗಬೇಕಿದೆ ಎಂದು ಹೇಳಿದರು. ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ವಲಯ ಮಟ್ಟದಲ್ಲಿ ಕಾರ್ಯಕರ್ತರು ಮತದಾರನ ಬಳಿ ತೆರಳಿ ಮತಯಾಚನೆ ಮಾಡುವಂತೆ ಶಾಸಕರು ಮನವಿ ಮಾಡಿದರು.
ಬಿಜೆಪಿಯಲ್ಲಿ ಬಂಡಾಯವಾಗಿದೆ, ಬಿಜೆಪಿ ಹೋಳಾಗಿದೆ. ಸ್ವಪಕ್ಷದ ವಿರುದ್ದವೇ ಬಂಡಾಯವಾಗಿ ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಇದರ ಲಾಭವನ್ನು ಕಾಂಗ್ರೆಸ್ ಪಡೆದುಕೊಳ್ಳುವಂತಾಗಬೇಕು. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಂಡಾಯ ಇಲ್ಲದ ಕಾರಣ ನಾವು ನಮ್ಮ ಅಭ್ಯರ್ಥಿಗೆ ಹೆಚ್ಚು ಮತ ಬೀಳುವಂತೆ ನೋಡಿಕೊಳ್ಳಬೇಕು ಎಂದು ಶಾಸಕ ಅಶೋಕ್ ರೈ ಹೇಳಿದರು.
ಈ ಚುನಾವಣೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ: ಆಯನೂರು ಮಂಜುನಾಥ್
ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಆಯನೂರು ಮಂಜುನಾಥ್ ರವರು ಮಾತನಾಡಿ ರಾಜ್ಯ ವಿಧಾನಪರಿಷತ್ನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಹುಮತದ ಕೊರತೆ ಇದೆ, ವಿಧಾನಸಭೆಯಲ್ಲಿ ಮಂಜೂರಾದ ಬಿಲ್ಗಳು ವಿಧಾನಪರಿಷತ್ನಲ್ಲಿ ಪಾಸಾಗುತ್ತಿಲ್ಲ ಈ ಕಾರಣಕ್ಕೆ ಕಾಂಗ್ರೆಸ್ ಬಹುಮತ ಪಡೆಯಬೇಕಾದ ಅನಿವಾರ್ಯತೆ ಇದ್ದು ಒಟ್ಟು 6 ಅಭ್ಯರ್ಥಿಗಳು ಕಣದಲ್ಲಿದ್ದು ಎಲ್ಲರನ್ನೂ ಗೆಲ್ಲಿಸುವ ಮೂಲಕ ಪಕ್ಷದ ಬಲವರ್ಧನೆ ಮಾಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಈ ವಿಚಾರವನ್ನು ಕಾರ್ಯಕರ್ತರಿಗೆ ಈಗಾಗಲೇ ತಿಳಿಸಿದ್ದಾರೆ ಎಂದು ಹೇಳಿದರು.
ಮತದಾರರ ಸಮಸ್ಯೆಗಳಿಗೆ ಖಂಡಿತವಾಗಿಯೂ ಸ್ಪಂದಿಸುವೆ, ಅನ್ಯಾಯವಾದಾಗ ಸ್ವಪಕ್ಷದವರ ವಿರುದ್ದವೂ ನಾನು ಹೋರಾಟ ಮಾಡಿ ಜನರಿಗೆ ನ್ಯಾಯ ಕೊಡಿಸುವ ಕೆಲಸ ಮಾಡಿದ್ದೇನೆ. ಮತದಾರರಿಗೆ ಅನ್ಯಾಯವಾದಾಗ ಧ್ವನಿ ಎತ್ತುವಲ್ಲಿ ನಾನು ಧ್ವನಿ ಎತ್ತುವೆ ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು. ಹೆಚ್ಚಿನ ಪ್ರಮಾಣದಲ್ಲಿ ಮತದಾನ ಮಾಡುವ ಮೂಲಕ ತನ್ನನ್ನು ಬೆಂಬಲಿಸುವಂತೆ ಮನವಿ ಮಾಡಿದರು.
ಪುತ್ತೂರು ಬ್ಲಾಕ್ ಅಧ್ಯಕ್ಷರಾದ ಎಂ ಬಿ ವಿಶ್ವನಾಥ್ ರೈ ,ವಿಟ್ಲ ಉಪ್ಪಿನಂಗಡಿ ಬ್ಲಾಕ್ ಬ್ಲಾಕ್ ಅಧ್ಯಕ್ಷರಾದ ಡಾ. ರಾಜಾರಾಂ ವಲಯ ಮತ್ತು ಬೂತ್ ಅಧ್ಯಕ್ಷರುಗಳು ಕೈಗೊಳ್ಳಬೇಕಾದ ಪ್ರಚಾರ ಕಾರ್ಯಗಳ ಬಗ್ಗೆ ವಿವರಣೆ ನೀಡಿ ಎಲ್ಲ ಮತದಾರರನ್ನು ಭೇಟಿಯಾಗಿ ಮತಯಾಚನೆ ಮಾಡುವಂತೆ ವಿನಂತಿಸಿದರು.
ಚುನಾವಣಾ ಉಸ್ತುವಾರಿ ಉಡುಪಿಯ ಗಫೂರ್ ಸಾಹೇಬ್ ರವರು ಅಭ್ಯರ್ಥಿ ಪರಿಚಯ ಹಾಗೂ ಚುನಾವಣಾ ರೂಪುರೇಶೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯಲ್ಲಿ ಪಕ್ಷದ ವಲಯ ಅಧ್ಯಕ್ಷರುಗಳು, ವಿವಿಧ ಘಟಕಗಳ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.