ಬೆಂಗಳೂರು, ಜೂನ್ 17: ನಾಡಿನಲ್ಲೆಡೆ ಬಕ್ರೀದ್ ಹಬ್ಬವನ್ನು ಆಚರಿಸಲಾಗುತ್ತಿದೆ. ಬೆಂಗಳೂರು ಚಾಮರಾಜಪೇಟೆಯಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಸಾಮೂಹಿಕ ಪ್ರಾರ್ಥನೆಯಲ್ಲಿ ಸಾವಿರಕ್ಕೂ ಹೆಚ್ಚು ಮುಸ್ಲಿಮರು ಭಾಗಿಯಾಗಿದ್ದಾರೆ. ಈ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವ ಜಮೀರ್ ಅಹ್ಮದ್ ಅವರು ಕೂಡ ಪಾಲ್ಗೊಂಡು ಪಾರ್ಥನೆ ಸಲ್ಲಿಸಿದರು. ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮೈದಾನದ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು, ಈ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ, ಅಲ್ಪಸಂಖ್ಯಾತರನ್ನು ಸಮಾನರನ್ನಾಗಿ ನೋಡುವ ಮನೋಭಾವ ನಮ್ಮದು. ಈ ವರ್ಷ ಒಳ್ಳೆ ಮಳೆ, ಬೆಳೆ ಆಗಲಿ ಎಂದು ಆಶಿಸುತ್ತೇನೆ. ಮತ್ತೊಮ್ಮೆ ಬಕ್ರೀದ್ ಹಬ್ಬದ ಶುಭಾಶಯಗಳು ಎಂದು ತಿಳಿಸಿದರು.
ಪ್ರಾರ್ಥನೆ ಮುಗಿಯುವ ತನಕ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ಚಾಮರಾಜಪೇಟೆ ರಸ್ತೆ ಸಂಪರ್ಕಿಸುವ ಕೆಆರ್ ಮಾರುಕಟ್ಟೆ ರಸ್ತೆ, ಚಾಮರಾಜಪೇಟೆ, ಬಸವನಗುಡಿ ರಸ್ತೆಗಳನ್ನು ಬಂದ್ ಮಾಡಲಾಗಿದ್ದು, ಬೆಂಗಳೂರು ಸಂಚಾರಿ ಪೊಲೀಸರು ಬದಲಿ ಮಾರ್ಗ ಸೂಚಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಲು ಹಾಕಿ ಸನ್ಮಾನಿಸಿದ ಸಚಿವ ಜಮೀರ್ ಅಹಮ್ಮದ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.