ನವದೆಹಲಿ, ಜುಲೈ 20: ಸಂಸತ್ ಭವನದಲ್ಲಿ ಇಂದಿನಿಂದ ಮುಂಗಾರು ಅಧಿವೇಶನ ಶುರುವಾಗಿದೆ. ಇದೇ ದಿನ ದೆಹಲಿಯಲ್ಲಿ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಿಜೆಪಿ ನೇತೃತ್ವದಲ್ಲಿ ಚಲೋ ಸಂಸದ್ ಎಂಬ ಬೃಹತ್ ಪ್ರತಿಭಟನೆ ನಡೆಯುತ್ತಿದೆ. ಸಾವಿರಾರು ಯುವಕ-ಯುವತಿಯರು ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ಜಂತರ್ಮಂತರ್ನಲ್ಲಿ ಬೃಹತ್ ರ್ಯಾಲಿ ಆಯೋಜಿಸಲಾಗಿದೆ. ಈ ಪ್ರತಿಭಟನೆ ತೀವ್ರಗೊಂಡ ಬೆನ್ನಲ್ಲೇ ಒಂದೆಡೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಜೊತೆ ಮೂರೂವರೆ ಗಂಟೆಗಳ ಕಾಲ ಮಹತ್ವದ ಸಭೆ ನಡೆಸಿದ್ದಾರೆ. ಇನ್ನೊಂದೆಡೆ ಕೇಂದ್ರ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಾಯಕರು ತಮ್ಮ ಬೇಡಿಕೆಗಳ ಪತ್ರವನ್ನು ಸಲ್ಲಿಸಿದ್ದಾರೆ.
ಜಂತರ್ ಮಂತರ್ನಿಂದ ಆರಂಭವಾದ ಈ ಬೃಹತ್ ಪಾದಯಾತ್ರೆ ಪಾರ್ಲಿಮೆಂಟ್ ಸ್ಟ್ರೀಟ್ ಕಡೆಗೆ ಧಾವಿಸುತ್ತಿದ್ದಂತೆ, ದೆಹಲಿ ಪೊಲೀಸರು ಪ್ರತಿಭಟನಾಕಾರರನ್ನು ತಡೆಯಲು ಬ್ಯಾರಿಕೇಡ್ಗಳನ್ನು ಅಳವಡಿಸಿ ಇಡೀ ಪ್ರದೇಶವನ್ನು ಕಂಪ್ಲೀಟ್ ಬಂದ್ ಮಾಡಿದರು. ಆದರೂ ಕಂಗೆಡದ ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ಮುರಿದು ಮುನ್ನುಗ್ಗಲು ಯತ್ನಿಸಿದಾಗ ಪರಿಸ್ಥಿತಿ ಕೈಮೀರಿ ಹೋಯಿತು. ಸ್ಥಿತಿಯನ್ನು ಹತೋಟಿಗೆ ತರಲು ದೆಹಲಿ ಪೊಲೀಸರು ತಮ್ಮ ಸಂಪೂರ್ಣ ಬಲಪ್ರಯೋಗ ಮಾಡಬೇಕಾಯಿತು. ಪ್ರತಿಭಟನಾಕಾರರನ್ನು ಚದುರಿಸಲು ಜಲಫಿರಂಗಿ ಬಳಸಿ, ಹಲವು ಪ್ರಮುಖ ನಾಯಕರನ್ನು ವಶಕ್ಕೆ ಪಡೆಯಲಾಯಿತು. ಇದರಿಂದಾಗಿ ಜಂತರ್ ಮಂತರ್ ಮತ್ತು ಸಂಸತ್ ಭವನದ ಸುತ್ತಮುತ್ತಲಿನ ರಸ್ತೆಗಳಲ್ಲಿ ಗಂಟೆಗಟ್ಟಲೆ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡು ಜನಸಾಮಾನ್ಯರು ಪರದಾಡುವಂತಾಯಿತು.
ಕೊನೆಗೂ ಪ್ರತಿಭಟನಾಕಾರರ ಜೊತೆ ಮಾತುಕತೆಗೆ ಒಪ್ಪಿರುವ ಕೇಂದ್ರ ಸರ್ಕಾರ ಸಿಜೆಪಿ ವಕ್ತಾರರು ಸಲ್ಲಿಸಿದ ಮನವಿ ಪತ್ರವನ್ನು ಸ್ವೀಕರಿಸಿದೆ. ಮತ್ತೊಂದೆಡೆ, ನೀಟ್ ಪರೀಕ್ಷೆ ಹಗರಣದ ಮಾನಸಿಕ ಒತ್ತಡಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದ ನೀಟ್ ವಿದ್ಯಾರ್ಥಿಯೊಬ್ಬರ ತಂದೆಯ ವಿಶೇಷ ವಿನಂತಿಯ ಮೇರೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ.
ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಿದ ನಂತರ ಜುಲೈ 18ರಿಂದ ಅಭಿಜೀತ್ ಉಪವಾಸ ಆರಂಭಿಸಿದ್ದರು. ವಾಂಗ್ಚುಕ್ ಅವರ ಮನವಿ ಮತ್ತು ಮೃತ ವಿದ್ಯಾರ್ಥಿಯ ತಂದೆಯ ಮಧ್ಯಸ್ಥಿಕೆಯ ನಂತರ ಅವರು ಸತ್ಯಾಗ್ರಹವನ್ನು ಹಿಂಪಡೆದಿದ್ದಾರೆ. ಆದರೆ, ಶಿಕ್ಷಣ ವ್ಯವಸ್ಥೆಯ ಸುಧಾರಣೆಗಾಗಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಸಿಜೆಪಿ (CJP) ವಕ್ತಾರರಾದ ಸೌರವ್ ದಾಸ್ ಮತ್ತು ಮತ್ತೊಬ್ಬ ವಕ್ತಾರರಾದ ಅಶುತೋಷ್ ರಂಕಾ ಅವರು ಸಚಿವ ಜೆ.ಪಿ. ನಡ್ಡಾ ಅವರ ನಿವಾಸದಲ್ಲಿ ಸುಮಾರು 10 ನಿಮಿಷಗಳ ಕಾಲ ಭೇಟಿಯಾಗಿ ಬೇಡಿಕೆಗಳ ಪತ್ರವನ್ನು ಹಸ್ತಾಂತರಿಸಿದ್ದಾರೆ. ಸಿಜೆಪಿಯ 3 ಪ್ರಮುಖ ಬೇಡಿಕೆಗಳೆಂದರೆ,
- ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಕ್ಷಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.
- ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರಿಗೆ ಆಸ್ಪತ್ರೆಯಿಂದ ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಪ್ರತಿಭಟನಾ ರ್ಯಾಲಿಗೆ ಆಗಮಿಸಲು ಅನುಮತಿ ನೀಡಬೇಕು.
- ನೀಟ್ ಪರೀಕ್ಷೆ ಹಗರಣ ಹಾಗೂ ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ತಲಾ 1 ಕೋಟಿ ರೂ. ಪರಿಹಾರ ನೀಡಬೇಕು.
ಪ್ರತಿಭಟನಾಕಾರರು ಮಾತುಕತೆಗೆ ಮುಂದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಸಿಜೆಪಿ (CJP) ನಾಯಕರ ನಡುವಿನ ಸಭೆಯು ಅತ್ಯಂತ ಸೌಹಾರ್ದಯುತ ವಾತಾವರಣದಲ್ಲಿ ನಡೆದಿದೆ ಎಂದು ಕೇಂದ್ರ ಸಚಿವ ಜೆ.ಪಿ. ನಡ್ಡಾ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, “ಇಂದು ಬೆಳಿಗ್ಗೆಯಿಂದಲೇ ಆರಂಭವಾದ ಚರ್ಚೆಯು ಸತತ ಹಲವು ಗಂಟೆಗಳ ಕಾಲ ಮುಂದುವರಿದಿತ್ತು. ಪ್ರತಿಭಟನಾಕಾರರ ಕಡೆಯಿಂದಲೇ ಇಂದು ಬೆಳಿಗ್ಗೆ ಮಾತುಕತೆಗಾಗಿ ಮೊದಲ ಪ್ರಸ್ತಾವನೆ ಬಂದಿತ್ತು. ಇಂದು ಬೆಳಿಗ್ಗೆ 11.50ಕ್ಕೆ ಆರಂಭಿಕ ಮೌಖಿಕ ಚರ್ಚೆಯೊಂದಿಗೆ ಮಾತುಕತೆ ಶುರುವಾಯಿತು. ನಂತರ ಪ್ರತಿಭಟನಾಕಾರರ ನಿಯೋಗದೊಂದಿಗೆ ಸುದೀರ್ಘ ಸಭೆ ನಡೆಯಿತು. ಇಂದು ಸಂಜೆ 4 ಗಂಟೆಗೆ ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನೊಳಗೊಂಡ ಅಧಿಕೃತ ಲಿಖಿತ ಮನವಿ ಪತ್ರವನ್ನು ನನಗೆ ನೀಡಿದ್ದಾರೆ.” ಎಂದು ನಡ್ಡಾ ಹೇಳಿದ್ದಾರೆ.
























