ಬೆಳ್ತಂಗಡಿ ತಾಲೂಕು ಕಚೇರಿ ಎದುರು ನಡೆದ ಪ್ರತಿಭಟನಾ ಸಭೆಯಲ್ಲಿ ಪ್ರಚೋದನಾಕಾರಿ ಹಾಗೂ ಧಾರ್ಮಿಕ ಭಾವನೆಗೆ ಧಕ್ಕೆಯಾಗುವ ರೀತಿಯಲ್ಲಿ ಭಾಷಣ ಮಾಡಿದ ಪ್ರಕರಣದಲ್ಲಿ ಆರೋಪಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ.
2015ರ ಜುಲೈ 23ರಂದು ಪಾಪ್ಯುಲ್ಲರ್ ಫ್ರಂಟ್ ಆಫ್ ಇಂಡಿಯಾ (PFI) ಬೆಳ್ತಂಗಡಿ ವಲಯ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರು ಪ್ರಚೋದನಾಕಾರಿ ಭಾಷಣ ಮಾಡಿದ್ದರೆಂದು ಆರೋಪಿಸಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡ ಸಂಹಿತೆಯ ಕಲಂ 153(ಎ) ಹಾಗೂ 295(ಎ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬೆಳ್ತಂಗಡಿ ಪೊಲೀಸ್ ಉಪನಿರೀಕ್ಷಕ ರವಿ ಬಿ.ಎಸ್. ಅವರು ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಧೀಶ ರಾಮಲಿಂಗಪ್ಪ ಅವರು ಕಲಂ 153(ಎ) ಅಡಿಯಲ್ಲಿ ಮಹಮ್ಮದ್ ರಿಯಾಜ್ ಫರಂಗಿಪೇಟೆ ಅವರಿಗೆ 6 ತಿಂಗಳ ಸಾದಾ ಕಾರಾಗೃಹ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ಆದೇಶಿಸಿದ್ದಾರೆ.
ಪ್ರಕರಣದ ತನಿಖೆ ಮಾಡಿದ ಬೆಳ್ತಂಗಡಿ ಠಾಣೆಯ ಅಂದಿನ ಉಪನಿರೀಕ್ಷಕರು ಹಾಗೂ ತನಿಖಾಧಿಕಾರಿ ಪ್ರಕರಣಕ್ಕೆ ಕುರಿತಂತೆ ಅಗತ್ಯ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದಲ್ಲಿ ಸರಕಾರಿ ಅಭಿಯೋಜಕಿ ಆಶೀತಾ ಅವರು ವಾದ ಮಂಡಿಸಿದ್ದರು. ವಿಚಾರಣೆ ಮಾಡಿದ ನ್ಯಾಯಾಲಯವು ಆರೋಪ ಸಾಬೀತಾಗಿದ್ದು, ಶಿಕ್ಷೆ ಪ್ರಕಟಿಸಿದೆ.
























