ಕಾಣಿಯೂರು: ಆಗಸ್ಟ್ 10 ರಂದು ದೋಲ್ಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಗ್ರಾಮ ಸಮಿತಿಯ ಸಭೆ ನಡೆಯಿತು.
ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಮಲೆನಾಡಿನ ರೈತರು ಹಾಗೂ ಗ್ರಾಮೀಣ ಜನರಿಗೆ ತೊಂದರೆಯಾಗಬಹುದಾದ ಯೋಜನೆಗಳ ವಿರುದ್ಧ ಹಲವು ವರ್ಷಗಳಿಂದ ಹೋರಾಟ ನಡೆಸಿಕೊಂಡು ಬರುತ್ತಿರುವ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸಂಚಾಲಕರಾದ ಕಿಶೋರ್ ಶಿರಾಡಿ, ಕಸ್ತೂರಿ ರಂಗನ್ ವರದಿ ಜಾರಿಯಿಂದ ಮಲೆನಾಡಿನ ಗ್ರಾಮೀಣ ಪ್ರದೇಶಗಳ ರೈತರು ಹಾಗೂ ಜನಸಾಮಾನ್ಯರಿಗೆ ಹಲವು ರೀತಿಯ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದೀಗ ಹೊರಡಿಸಿರುವ 7ನೇ ಕರಡು ಅಧಿಸೂಚನೆಯಲ್ಲಿಯೂ ಮಲೆನಾಡಿನ ಗ್ರಾಮೀಣ ಪ್ರದೇಶಗಳ ಜನಜೀವನ ಹಾಗೂ ಮೂಲಭೂತ ಸೌಕರ್ಯಗಳಿಗೆ ಸಂಬಂಧಿಸಿದಂತೆ ಹಲವು ನಿರ್ಬಂಧಗಳು, ಕೃಷಿ ಚಟುವಟಿಕೆ, ರಾಸಾಯನಿಕ ಗೊಬ್ಬರ ಬಳಕೆ, ರಸ್ತೆ ಅಭಿವೃದ್ಧಿ ಹಾಗೂ ಇತರ ಮೂಲಭೂತ ಸೌಕರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.
ಕಸ್ತೂರಿ ರಂಗನ್ ವರದಿ ವ್ಯಾಪ್ತಿಗೆ ಒಳಪಡುವ ಗ್ರಾಮಗಳ ಜನರಿಗೆ ಮಾತ್ರವಲ್ಲದೆ, ಬಾಧಿತ ಗ್ರಾಮಗಳ ಗಡಿಯಿಂದ ಸುಮಾರು 10 ಕಿ.ಮೀ. ವ್ಯಾಪ್ತಿಯಲ್ಲಿರುವ ಗ್ರಾಮಗಳ ಮೇಲೂ ಇದರ ಪರಿಣಾಮ ಬೀರಬಹುದು ಎಂದು ತಿಳಿಸಿದರು .
ಪಕ್ಷತೀತವಾದ, ಜಾತ್ಯತೀತ,ಜನಹಿತ, ರೈತರ ಹಕ್ಕು ಹಾಗೂ ಮಲೆನಾಡಿನ ಜನಜೀವನದ ರಕ್ಷಣೆಗಾಗಿ ವಿಷಯಾಧಾರಿತ ಮತ್ತು ಕಾನೂನಾತ್ಮಕವಾಗಿ ಹೋರಾಟ ನಡೆಸುದಾಗಿ ಸ್ಪಷ್ಟಪಡಿಸಿದರು.
ಗ್ರಾಮಸ್ತರಾದ ಮೋಹನ್ ದಾಸ್ ರೈ ಬಾಲ್ಕಡಿ ಸ್ವಾಗತಿಸಿದರು ಗ್ರಾಮ ಸಂಚಾಲಕರಾದ ಶ್ರೀ ಸೀತಾರಾಮ ಮರಕ್ಕಡ ,ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಮುಖರಾದ ರಮಾನಂದ ಎಣ್ಣೆಮಜಲು, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಮಿಲನ್ ಬಾಳಿಕಳ, ಲೋಕಯ್ಯ ಪರವಾ ದೋಲ್ಪಡಿ ಧನ್ಯವಾದ ಸಮರ್ಪಿಸಿದರು. ಗ್ರಾಮ ಸಮಿತಿಯ ಪ್ರಮುಖರು, ಸದಸ್ಯರು,ಗ್ರಾಮದ ಹಿರಿಯರು ಉಪಸ್ಥಿತರಿದ್ದರು
























