ಉಡುಪಿ: ಅಲೆವೂರು ಗ್ರಾಮದ ಕೆಸ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಗಿ ಪರಿಸರದಲ್ಲಿರುವ ಬಾಳೆಹಣ್ಣು ರಖಂ ವ್ಯಾಪಾರಸ್ಥರು ಮತ್ತು ದಾಸ್ತಾನುದಾರರ 3–4 ಗೋದಾಮುಗಳ ಮೇಲೆ ಗುರುವಾರ ಬೆಳಿಗ್ಗೆ ಏಕಕಾಲದಲ್ಲಿ ದಾಳಿ ನಡೆಸಿದ ಅಧಿಕಾರಿಗಳು, ಬಾಳೆಹಣ್ಣು ಹಣ್ಣಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ಹಾಗೂ ಕೃತಕ ಬಣ್ಣ ನೀಡುವ ಪದಾರ್ಥಗಳನ್ನು ವಶಪಡಿಸಿಕೊಂಡಿದ್ದಾರೆ.
ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿದ್ದು, ಬಾಳೆಹಣ್ಣುಗಳಿಗೆ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಕೆ ಮಾಡುತ್ತಿದ್ದ ಆರೋಪದ ಮೇರೆಗೆ ಹಲವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದೆ.
ದಾಳಿ ವೇಳೆ ರಾಸಾಯನಿಕಗಳನ್ನು ಬಳಸಲು ಉಪಯೋಗಿಸುತ್ತಿದ್ದ ಪರಿಕರಗಳು ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ವಾಹನಗಳನ್ನು ಕೂಡ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಗ್ಯಕ್ಕೆ ಹಾನಿಕಾರಕವಾದ ರಾಸಾಯನಿಕಗಳನ್ನು ಬಳಸಿ ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸುವುದು ಹಾಗೂ ಬಣ್ಣ ನೀಡುವುದರ ವಿರುದ್ಧ ಪ್ರಕರಣ ದಾಖಲು ಕೃತಕ ರಾಸಾಯನಿಕ ಮತ್ತು ಬಣ್ಣಗಳನ್ನು ಬಳಸುತ್ತಿದ್ದ ಗೋದಾಮಿನ ಮಾಲೀಕರು ಹಾಗೂ ಸಿಬ್ಬಂದಿಗಳ ವಿರುದ್ಧ ಕಾನೂನು ರೀತ್ಯಾ ಪ್ರಕರಣ ದಾಖಲಿಸಲಾಗಿದೆ. ವಶಪಡಿಸಿಕೊಂಡ ವಸ್ತುಗಳು: ಅಕ್ರಮಕ್ಕೆ ಬಳಸುತ್ತಿದ್ದ ರಾಸಾಯನಿಕಗಳು, ಕೃತಕ ಬಣ್ಣದ ದ್ರಾವಣಗಳು ಹಾಗೂ ಹಣ್ಣುಗಳನ್ನು ಸಾಗಿಸಲು ಬಳಸುತ್ತಿದ್ದ ವಾಹನಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಸಾರ್ವಜನಿಕರು ಮಾರುಕಟ್ಟೆಯಲ್ಲಿ ಅತಿಯಾದ ಹಳದಿ ಅಥವಾ ಅಸ್ವಾಭಾವಿಕ ಬಣ್ಣ ಹೊಂದಿರುವ ಹಣ್ಣುಗಳನ್ನು ಖರೀದಿಸುವಾಗ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ತಿಳಿಸಿದ್ದಾರೆ.
























