ಪುತ್ತೂರು: ಕುಟುಂಬದ ಆಸರೆಯಿಲ್ಲದೆ ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 20 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸುಮಾರು 52 ವರ್ಷದ ಅನಾಥ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯನ್ನು ರಕ್ಷಿಸಿ, ಮಂಗಳೂರಿನ ಕೈಕಂಬದಲ್ಲಿರುವ ‘ಜೀವದಾನ ಚಾರಿಟೇಬಲ್ ಟ್ರಸ್ಟ್’ ಪುನರ್ವಸತಿ ಕೇಂದ್ರಕ್ಕೆ ಸೇರ್ಪಡೆಗೊಳಿಸುವ ಮಾನವೀಯ ಕಾರ್ಯವನ್ನು ರೋಟರಿ ಕ್ಲಬ್ ಪುತ್ತೂರು ಯುವದ ಎಕ್ಸಿಕ್ಯೂಟಿವ್ ಸೆಕ್ರೆಟರಿ ಹಾಗೂ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ ನೆರವೇರಿಸಲಾಗಿದೆ.
ಕಳೆದ 20 ದಿನಗಳಿಂದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಗೆ ವೈದ್ಯಾಧಿಕಾರಿಗಳು ಹಾಗೂ ಆಸ್ಪತ್ರೆಯ ಸರ್ವ ಸಿಬ್ಬಂದಿ ಸೂಕ್ತ ಚಿಕಿತ್ಸೆ ಮತ್ತು ಆರೈಕೆ ನೀಡಿದ್ದು, ಪುನರ್ವಸತಿ ಕಲ್ಪಿಸುವಲ್ಲಿಯೂ ಮುತುವರ್ಜಿ ವಹಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವಧಿಯಲ್ಲಿ ಮಹಿಳೆಯು ಇತರ ಒಳರೋಗಿಗಳೊಂದಿಗೆ ಆತ್ಮೀಯ ಬಾಂಧವ್ಯ ಬೆಳೆಸಿಕೊಂಡಿದ್ದರು. ಅವರನ್ನು ಪುನರ್ವಸತಿ ಕೇಂದ್ರಕ್ಕೆ ಕರೆದೊಯ್ಯುವ ಸಂದರ್ಭದಲ್ಲಿ ಆಸ್ಪತ್ರೆಯ ಒಳರೋಗಿಗಳು ಹಾಗೂ ಸಿಬ್ಬಂದಿ ಭಾವುಕರಾಗಿ ಬೀಳ್ಕೊಟ್ಟರು.
ಕುಟುಂಬದ ಬೆಂಬಲವಿಲ್ಲದೆ ಅನಾಥರಾಗಿದ್ದ ಮಹಿಳೆಯ ಸ್ಥಿತಿಯನ್ನು ಗಮನಿಸಿದ ಸರ್ಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಯಧುರಾಜ್ ಅವರು ರೋಗಿಯ ಸೂಕ್ತ ಆರೈಕೆ ಹಾಗೂ ಸುರಕ್ಷಿತ ಆಶ್ರಯಕ್ಕಾಗಿ ಉಮೇಶ್ ನಾಯಕ್ ಅವರನ್ನು ಸಂಪರ್ಕಿಸಿದ್ದರು.
ಆಸ್ಪತ್ರೆಯ ಆಪ್ತ ಸಲಹಾ ಕೇಂದ್ರದ ಸಮಾಲೋಚಕ ತಾರಾನಾಥ್ ಅವರು ಮಹಿಳೆಗೆ ಆಪ್ತ ಸಮಾಲೋಚನೆ ನೀಡಿ, ಪುನರ್ವಸತಿ ಕೇಂದ್ರಕ್ಕೆ ತೆರಳಲು ಮನವರಿಕೆ ಮಾಡಿಕೊಟ್ಟರು. ಹೆಚ್ಚುವರಿ ಚಿಕಿತ್ಸೆಯ ಅಗತ್ಯವಿದ್ದ ಸಂದರ್ಭದಲ್ಲಿಯೂ ಸಹಕಾರ ನೀಡಿದರು. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಮಹಿಳೆಗೆ ಪ್ರೀತಿ ಮತ್ತು ಕಾಳಜಿಯಿಂದ ಆರೈಕೆ ನೀಡಿ ಉತ್ತಮ ಚಿಕಿತ್ಸೆ ನೀಡಿದರು.























